deshadoothanews

ಮಳೆ ಕೊರತೆ ಮುಂದುವರೆದಲ್ಲಿ ಸಮರ್ಪಕ ನೀರು ಪೂರೈಕೆಗೆ ಕ್ರಿಯಾಯೋಜನೆ ರೂಪಿಸಲು ನಿರ್ದೇಶನ

ಡಿ ಡಿ ನ್ಯೂಸ್. ಕೊಪ್ಪಳ

0
ಡಿ ಡಿ ನ್ಯೂಸ್. ಕೊಪ್ಪಳ :
ಮಳೆ ಕೊರತೆ ಮುಂದುವರೆದಲ್ಲಿ ಜನರಿಗೆ ತೊಂದರೆಯಾಗದ ಹಾಗೆ ಕುಡಿಯುವ ನೀರು ಪೂರೈಸಲು ಯಾವ ರೀತಿ ಕ್ರಮ ತೆಗೆದುಕೊಳ್ಳಬಹುದು ಎಂಬುದರ ಬಗ್ಗೆ ಕ್ರಿಯಾ ಯೋಜನೆ ರೂಪಿಸಿ ಜಿಲ್ಲಾ ಪಂಚಾಯತ್‌ಗೆ ಸಲ್ಲಿಸಲು ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶಬಾಬು ಅವರು ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ವಿಭಾಗದ ಅಭಿಯಂತರರಿಗೆ ನಿರ್ದೇಶನ ನೀಡಿದರು.
ಜಿಲ್ಲಾಡಳಿತ ಭವನದಲ್ಲಿನ ಕೆಸ್ವಾನ್ ವಿಡಿಯೋ ಸಭಾಂಗಣದಲ್ಲಿ ಜೂನ್ 23ರಂದು ಕುಡಿಯುವ ನೀರು ಸರಬರಾಜು ಸೇರಿದಂತೆ ನಾನಾ ವಿಷಯಗಳ ಬಗ್ಗೆ ಜಿಲ್ಲಾ ಹಾಗೂ ತಾಲೂಕುಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಅವರು ಮಾತನಾಡಿದರು.
ಮಳೆ ಅಭಾವದ ಕಾರಣ ನೀರಿನ ಮೂಲಗಳು ಬತ್ತಿದಲ್ಲಿ ಅಂತಹ ಕಡೆಗಳಲ್ಲಿ ಸಮರ್ಪಕ ನೀರಿನ ಪೂರೈಕೆಗೆ ರ್ಯಾಯ ವ್ಯವಸ್ಥೆಯ ಕಲ್ಪಿಸುವ ಬಗ್ಗೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಈಗಿನಿಂದಲೇ ಮಾಡಿಕೊಳ್ಳಬೇಕು. ಬೇರೆ ನೀರಿನ ಮೂಲಗಳು ಅಥವಾ ಖಾಸಗಿ ಬೊರವೆಲ್‌ಗಳನ್ನು ಗುರುತಿಸಿಕೊಂಡು ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಕ್ಕೆ ಸನ್ನದ್ಧರಾಗಿರಬೇಕು ಎಂದು ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ವಿಭಾಗದ ಅಭಿಯಂತರರಿಗೆ ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. ಮುಖ್ಯವಾಗಿ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸುವ ನಿಟ್ಟಿನಲ್ಲಿ ಗ್ರಾಮೀಣ ಸೇರಿದಂತೆ ನಗರ ಪ್ರದೇಶಗಳಲ್ಲಿನ ಯಾವುದೇ ಕಡೆಗಳಲ್ಲಿ ಕುಡಿಯುವ ನೀರು ಸರಬರಾಜು ಪೈಪುಗಳಲ್ಲಿ ಕಲುಷಿತ ನೀರು ಸೇರದ ಹಾಗೆ ಸೋರಿಕೆ ಆಗುವುದನ್ನು ತಡೆಯುವುದಕ್ಕೆ ಮೊದಲಾದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿಗಳು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
*ತಾಲೂಕುಮಟ್ಟದಲ್ಲಿ ಸಹ ಸಭೆ ನಡೆಯಲಿ*: ನೀರಿನ ಸಮಸ್ಯೆ ಕಾಣಿಸಿದ ಕಡೆಗೆ ಕೂಡಲೇ ಭೇಟಿ ನೀಡಿ ರ್ಯಾಯ ವ್ಯವಸ್ಥೆ ಕಲ್ಪಿಸಬೇಕು. ಜಿಲ್ಲಾಮಟ್ಟದ ಸಭೆಗಳಲ್ಲಿ ನಿರ್ದೇಶಿಸಿದಂತೆ ಕಾರ್ಯಪ್ರವೃತ್ತರಾಗಬೇಕು. ತಾಲೂಕುಮಟ್ಟದಲ್ಲಿ ಸಹ ತಹಸೀಲ್ದಾರರು, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿಗಳು ಸೇರಿದಂತೆ ಇನ್ನೀತರರು ನಿಯಮಿತವಾಗಿ ಸಭೆ ನಡೆಸಿ ಜಿಲ್ಲಾಮಟ್ಟದ ಸಭೆಯಲ್ಲಿ ತಿಳಿಸಿದ ಅಂಶಗಳ ಬಗ್ಗೆ ಸಭೆಗಳಲ್ಲಿ ಚರ್ಚಿಸಿ ತಾಲೂಕುಮಟ್ಟದಲ್ಲಿ ಅಚ್ಚುಕಟ್ಟಾಗಿ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಜವಾಬ್ದಾರಿಯನ್ನು ಹಂಚಿಕೆ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು. ಕುಡಿಯುವ ನೀರು ಪೂರೈಕೆಗೆ ಅನುಕೂಲವಾವ ಹಾಗೆ ಸಮರ್ಪಕ ವಿದ್ಯುತ್ ಪೂರೈಕೆಗೆ ಕ್ರಮ ವಹಿಸಲು ಇದೆ ವೇಳೆ ಜಿಲ್ಲಾಧಿಕಾರಿಗಳು ಜೆಸ್ಕಾಂ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

 

*ನೀರಿನ ಪರೀಕ್ಷೆ ನಡೆಸಿ*: ನಗರ ಹಾಗು ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿಗಾಗಿ ಕೊರೆಯಿಸಿದ ಆಯಾ ಕಡೆಗಳಲ್ಲಿ ಇರುವ ಎಲ್ಲಾ ಕೊಳವೆಬಾವಿಯ ನೀರನ್ನು ಪರೀಕ್ಷೆಗೊಳಪಡಿಸಬೇಕು. ಶುದ್ಧ ಕುಡಿಯುವ ನೀರಿನ ಘಟಕಗಳನ್ನು ವಾರಕ್ಕೊಮ್ಮೆ, ಕೆರೆ, ಬಾವಿ ಸೇರಿದಂತೆ ಎಲ್ಲಾ ನೀರಿನ ಮೂಲಗಳನ್ನು ವಾರಕ್ಕೆರಡು ಬಾರಿ ಪರೀಕ್ಷಿಸುವುದನ್ನು ಕಡ್ಡಾಯಗೊಳಿಸಬೇಕು ಎಂದು ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿ ಅಧಿಕಾರಿಗಳಿಗೆ ಮತ್ತು ಗ್ರಾಮಮಟ್ಟದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ನಿರ್ದೇಶಿಸಿದರು. ನೀರು ಪೂರೈಸುವ ಮುನ್ನ ಮೇಲ್ಮಟ್ಟದ ಜಲಾಗಾರಗಳು ಮತ್ತು ಇನ್ನೀತರ ನೀರು ಶೇಖರಣೆ ಪ್ರದೇಶಗಳ ಶುದ್ಧೀಕರಣಕ್ಕೆ ಹೆಚ್ಚಿನ ಒತ್ತು ಕೊಡಬೇಕು ಎಂದು ಸೂಚನೆ ನೀಡಿದರು.
ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ವರದಿಯಾದ ಶಂಕಿತ ವಾಂತಿ ಬೇಧಿ ಪ್ರಕರಣಗಳ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ತಾಲೂಕುವಾರು ಆರೋಗ್ಯ ಕಾರ್ಯಕ್ರಮಗಳ ಜಾರಿಯ ಬಗ್ಗೆ ಸಲಹೆ ಮಾಡಿದರು. ಶಂಕಿತ ವಾಂತಿ ಬೇಧಿ ಪ್ರಕರಣಗಳು ಕಾಣಿಸಿದಲ್ಲಿ ಅಂತಹ ಕಡೆಗಳಲ್ಲಿ ಕೂಡಲೇ ತಾತ್ಕಾಲಿಕ ಆರೋಗ್ಯ ಕೇಂದ್ರ ಸ್ಥಾಪನೆ ಮಾಡಲು ಮತ್ತು ಔಷಧಿ ಲಭ್ಯತೆಯ ಬಗ್ಗೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಗಮನ ಹರಿಸಬೇಕು. ಡೆಂಗೆ, ಚಿಕೂನ್‌ಗುನ್ಯ ಹರಡಲು ಕಾರಣವಾಗುವ ಮಾರಕ ಸೊಳ್ಳೆಗಳ ನಿಯಂತ್ರಣಕ್ಕೆ ಎಲ್ಲಾ ರೀತಿಯ ಅಗತ್ಯ ಕ್ರಮ ವಹಿಸಬೇಕು. ಆರೋಗ್ಯ ಇಲಾಖೆಯ ಜಾಗೃತಿ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾ ಹಾಗೂ ತಾಲೂಕುಮಟ್ಟದ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.
ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿನ ಗಟಾರುಗಳ ಶುಚಿತ್ವ, ಸುತ್ತಲಿನ ಪರಿಸರ ಸಂರಕ್ಷಣೆ ಮಾಡಲು ಮತ್ತು ವೈಯಕ್ತಿಕ ಶುಚಿತ್ವದ ಬಗ್ಗೆ ಗಮನ ಹರಿಸಲು ಆರೋಗ್ಯ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲು ಮತ್ತು ಸ್ವಚ್ಛ ವಾಹಿನಿಗಳ ಮೂಲಕ ಮತ್ತು ಮನೆಮನೆಗೆ ಕರಪತ್ರ ವಿತರಿಸಿ ಸಾರ್ವಜನಿಕರಲ್ಲಿ ಆರೋಗ್ಯ ಜಾಗೃತಿ ಮೂಡಿಸಲು ಒತ್ತು ಕೊಡಬೇಕು ಎಂದು ಜಿಲ್ಲಾಧಿಕಾರಿಗಳು ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಮತ್ತು ಗ್ರಾಮಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದರು.
*ಪ್ರಕರಣಗಳು ಮರುಕಳಿಸಿದಲ್ಲಿ ಕ್ರಮ*: ನೀರು ಪರೀಕ್ಷೆಯ ವೇಳೆ ಕುಡಿಯಲು ಯೋಗ್ಯವಲ್ಲ ಎಂದು ವರದಿ ಬಂದ ಕೂಡಲೇ ಜನತೆಗೆ ಟ್ಯಾಂಕರಗಳ ಮೂಲಕ ನೀರು ಪೂರೈಕೆಗೆ ಕ್ರಮ ವಹಿಸಬೇಕು. ಶುದ್ಧ ಕುಡಿಯುವ ನೀರಿನ ಘಟಕಗಳು ಎಲ್ಲಾ ಕಡೆಗಳಲ್ಲಿ ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಬೇಕು. ಜಿಲ್ಲೆಯ ಎಲ್ಲಾ ಗ್ರಾಮಗಳಲ್ಲಿನ ಗಟಾರುಗಳು ಶುಚಿಯಾಗಿ, ಗ್ರಾಮದ ಯಾವುದೇ ಕಡೆಗಳಲ್ಲಿ ನೀರು ನಿಲ್ಲದಂತೆ ಗ್ರಾಮದಲ್ಲಿ ಉತ್ತಮ ಪರಿಸರ ಮತ್ತು ಗ್ರಾಮದ ಸೌಂದರ್ಯೀಕರಣಕ್ಕೆ ಆಯಾ ಗ್ರಾಮಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮುತುವರ್ಜಿ ವಹಿಸಿ ಕಾರ್ಯಪ್ರವೃತ್ತರಾಗಬೇಕು. ಆಯಾ ತಾಲೂಕಿನ ತಾಪಂ ಕಾರ್ಯನಿರ್ವಹಣಾಧಿಕಾರಿಗಳು ಈ ಬಗ್ಗೆ ಸೂಕ್ತ ಮೇಲ್ವಿಚಾರಣೆ ನಡೆಸಬೇಕು. ಆಧಾಗ್ಯ ವಾಂತಿ ಬೇಧಿ ಪ್ರಕರಣಗಳು ಮರುಕಳಿಸಿ ಅದಕ್ಕೆ ಕಲುಷಿತ ನೀರು ಸೇವನೆಯೇ ಕಾರಣ ಎಂದು ಸಾಬೀತಾದಲ್ಲಿ ಸಂಬಂಧಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನೇ ಹೊಣೆಯಾಗಿಸಿ ಕ್ರಮ ವಹಿಸಲಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
*ಈ ಕೈವೈಸಿ ಕಾರ್ಯ*: ಈ ಕೆವೈಸಿ ಮಾಡಿಸಿರುವ ಮತ್ತು ತಮ್ಮ ಬ್ಯಾಂಕ್ ಖಾತೆಗಳಿಗೆ ಆಧಾರ್ ನಂಬರ್ ಲಿಂಕ್ ಮಾಡಿಸಿರುವ ಫಲಾನಭವಗಳಿಗೆ ಮಾತ್ರ ಕಿಸಾನ್ ಸಮ್ಮಾನ್ ಹಣ ಜಮೆಯಾಗಲಿದೆ. ಹೀಗಾಗಿ ಈ ಕೈವೈಸಿ ಬಾಕಿ ಉಳಿಸಿಕೊಂಡಿರುವ ರೈತರು ರೈತ ಸಂಪರ್ಕ ಕೇಂದ್ರಗಳು ಅಥವಾ ಗ್ರಾಮ್ ಒನ್ ಇಲ್ಲವೇ ಸೇವಾ ಸಿಂಧು ಕೇಂದ್ರಗಳಿಗೆ ಭೇಟಿ ನೀಡಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಇ ಕೈವೈಸಿ ಮಾಡಿಸಬೇಕು ಎನ್ನುವ ಮಾಹಿತಿಯನ್ನು ರೈತರಿಗೆ ತಲುಪಿಸುತ್ತಿದ್ದೇವೆ. ಇದಕ್ಕಾಗಿ ಜೂನ್ 30 ಕೊನೆಯ ದಿನವಾಗಿದ್ದು ಈ ಮಾಹಿತಿಯನ್ನು ರೈತರಿಗೆ ಮತ್ತೊಮ್ಮೆ ತಲುಪಿಸುವ ಕೃಷಿ ಇಲಾಖೆಯ ಕಾರ್ಯಕ್ಕೆ ಆಯಾ ತಾಲೂಕುಗಳಲ್ಲಿ ತಹಸೀಲ್ದಾರರು ಮತ್ತು ತಾಪಂ ಕಾರ್ಯನಿರ್ವಹಣಾಧಿಕಾರಿಗಳ ಸಹಕಾರ ಕೋರಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಜಂಟಿ ಕೃಷಿ ನಿರ್ದೇಶಕರಾದ ರುದ್ರೇಶಪ್ಪ ಟಿ. ಅವರು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ., ಸಹಾಯಕ ಆಯುಕ್ತರಾದ ಬಸವಣ್ಣೆಪ್ಪ ಕಲಶೆಟ್ಟಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಕಾವ್ಯರಾಣಿ ಕೆ.ವಿ. ಸೇರಿದಂತೆ ವಿವಿಧ ತಾಲೂಕುಗಳ ತಹಸೀಲ್ದಾರರು, ತಾಪಂ ಕಾರ್ಯನಿರ್ವಹಣಾಧಿಕಾರಿಗಳು, ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಮತ್ತು ಇನ್ನಿತರ ಇಲಾಖೆಗಳ ಅಧಿಕಾರಿಗಳು ಇದ್ದರು.
Leave A Reply

Your email address will not be published.