deshadoothanews

ಪದಕ ವಿಜೇತ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನಕ್ಕಾಗಿ: ಅರ್ಜಿ ಆಹ್ವಾನ

ಡಿ ಡಿ ನ್ಯೂಸ್. ಕೊಪ್ಪಳ

0
ಡಿ ಡಿ ನ್ಯೂಸ್. ಕೊಪ್ಪಳ :
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2023-24ನೇ ಸಾಲಿಗೆ ಅಂತರರಾಷ್ಟ್ರೀಯ, ರಾಷ್ಟ್ರೀಯ, ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆ ಅಡಿಯಲ್ಲಿ 2022ನೇ ಕ್ಯಾಲೆಂಡರ್ ವರ್ಷದಲ್ಲಿ 2022ರ ಜನವರಿ 01ರಿಂದ ಡಿಸೆಂಬರ್ 31ರವರೆಗೆ ಅಂತರರಾಷ್ಟ್ರೀಯ, ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ ಅದಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ನೀಡುವ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗಿರುತ್ತದೆ.
ಅರ್ಜಿ ಸಲ್ಲಿಸಲು ಕ್ರೀಡಾಪಟುಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು. ಜಾತಿ ಪ್ರಮಾಣ ಪತ್ರ ಕಡ್ಡಾಯವಾಗಿ ಲಗತ್ತಿಸಿರಬೇಕು. ಪ್ರೋತ್ಸಾಹಧನವನ್ನು ಕರ್ನಾಟಕದ ಕ್ರೀಡಾಪಟುಗಳಿಗೆ ಮಾತ್ರವಾಗಿದ್ದು, ಅಂತರರಾಷ್ಟ್ರೀಯ, ರಾಷ್ಟ್ರೀಯ ರಾಜ್ಯ ಮಟ್ಟದ ತಂಡಗಳನ್ನು ಪ್ರತಿನಿಧಿಸಿ ಸರ್ಕಾರದಿಂದ ಅಂಗೀಕೃತವಾದಂತಹ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ವಿಜೇತರಾಗಿರಬೇಕು. ಕರ್ನಾಟಕದ ಮೂಲದವರಾಗಿದ್ದು, ಬೇರೆ ರಾಜ್ಯ ಅಥವಾ ಕ್ರೀಡಾ ತಂಡವನ್ನು (ಸರ್ವಿಸಸ್, ಏರ್‌ಲೈನ್ಸ್, ರೈಲ್ವೆ) ಪ್ರತಿನಿಧಿಸುವ ಕ್ರೀಡಾಪಟುಗಳು ಈ ಪುರಸ್ಕಾರಕ್ಕೆ ಅರ್ಹರಾಗಿರುವುದಿಲ್ಲ. ಸರ್ಕಾರಿ, ಅರೆ ಸರ್ಕಾರಿ ಇಲಾಖೆಗಳಲ್ಲಿ ನೇಮಕಗೊಂಡು ಸೇವೆ ಸಲ್ಲಿಸುತ್ತಿರುವವರು ಮತ್ತು ಅಂತರರಾಷ್ಟ್ರೀಯ, ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ಪಡೆದವರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ. ಉಳಿದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ, ಪದಕ ಪಡೆದಿರುವವರು ಅರ್ಹರಿರುವುದಿಲ್ಲ. ಕ್ರೀಡಾಪಟುಗಳು ಆಧಾರ್ ಕಾರ್ಡ, ಪಡಿತರ ಚೀಟಿ, ರೇಷನ್ ಕಾರ್ಡ, ಆರ್.ಡಿ ಸಂಖ್ಯೆಯನ್ನು ಒಳಗೊಂಡ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ಸಲ್ಲಿಸತಬೇಕು. ಒಲಂಪಿಕ್, ಏಷ್ಯನ್, ಕಾಮನ್ ವೆಲ್ತ್ ಕ್ರೀಡೆಗಳಲ್ಲಿ ಅಂತರರಾಷ್ಟ್ರೀಯ ಸಂಸ್ಥೆ ಮತ್ತು ಯುವ ವ್ಯವಹಾರ ಮತ್ತು ಕ್ರೀಡಾ ಮಂತ್ರಾಲಯದಿಂದ ಮಾನ್ಯತೆ ಪಡೆದ ಕ್ರೀಡಾ ಸಂಸ್ಥೆಗಳು ನಡೆಸುವ ಅಧಿಕೃತ ಚಾಂಪಿಯನ್ ಶಿಪ್ ಗಳಿಗೆ ಮಾತ್ರ ಪ್ರೋತ್ಸಾಹಧನ ನೀಡಲಾಗುವುದು. ಮಾನ್ಯತೆ ಪಡೆಯದೇ ಇರುವ ಯಾವುದೇ ಫೆಡರೇಷನ್ ನಡೆಸುವ ಕ್ರೀಡೆಗಳಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಪ್ರೋತ್ಸಾಹಧನಕ್ಕೆ ಅರ್ಹರಾಗಿರುವುದಿಲ್ಲ.
6ನೇ ತರಗತಿಯಿಂದ ವ್ಯಾಸಂಗ ಮಾಡುತ್ತಿರುವ ಕ್ರೀಡಾಪಟುಗಳು ಪ್ರೋತ್ಸಾಹಧನಕ್ಕೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಅಂತರರಾಷ್ಟ್ರೀಯ, ರಾಷ್ಟ್ರೀಯ, ಮತ್ತು ರಾಜ್ಯ ಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ಭಾಗವಹಿಸಿದ ಕ್ರೀಡಾಪಟುಗಳು ಪ್ರೋತ್ಸಾಹಧನಕ್ಕೆ ಅರ್ಹರಾಗಿರುವುದಿಲ್ಲ. ಬ್ಯಾಂಕ್ ಖಾತೆ ಕಡ್ಡಾಯವಾಗಿ ಕ್ರೀಡಾಪಟುವಿನ ಹೆಸರಿನಲ್ಲಿರಬೇಕು. ಬ್ಯಾಂಕ್ ಪಾಸ್‌ಪುಸ್ತಕದ ಮುಖ ಪುಟವನ್ನು ಲಗತ್ತಿಸಬೇಕು. ಹೆಸರು, ಖಾತೆ ಸಂಖ್ಯೆ, ಐಎಫ್‌ಎಸ್‌ಸಿ ಸಂಖ್ಯೆ ಇರುವ ಸಂಪೂರ್ಣ ವಿವರಗಳೊನ್ನೊಳಗೊಂಡ ಪ್ರತಿ, ಹಿಂದಿನ ಕ್ಯಾಲೆಂಡರ್ ವರ್ಷದ ಕ್ರೀಡಾ ಸಾಧನೆಯನ್ನು ಮಾತ್ರ ಪರಿಗಣಿಸಿ ಪ್ರಸಕ್ತ ಸಾಲಿನ ಪ್ರೋತ್ಸಾಹಧನವನ್ನು ಪಾವತಿಸಲಾಗುವುದು. ಒಂದು ವರ್ಷದಲ್ಲಿ ಒಂದಕ್ಕಿಂತ ಹೆಚ್ಚಿನ ಯಾವುದೇ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ವಿಜೇತರಾದರೂ ಕೂಡ ಒಂದು ಅತ್ಯುತ್ತಮ ಸಾಧನೆಗಳಿಗೆ ಮಾತ್ರ ಪ್ರೋತ್ಸಾಹಧನವನ್ನು ಪಾವತಿಸಲಾಗುವುದು.
ಅರ್ಜಿಯನ್ನು ಸೆಪ್ಟೆಂಬರ್ 07 ರೊಳಗಾಗಿ ಕೊಪ್ಪಳ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರಿಗೆ ಸಲ್ಲಿಸಬೇಕು. ಅರ್ಜಿಗಳನ್ನು ನೇರವಾಗಿ ಕೇಂದ್ರ ಕಚೇರಿಯಲ್ಲಿ ಸ್ವೀಕರಿಸಲಾಗುವುದಿಲ್ಲ ಎಂದು ಕೊಪ್ಪಳ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave A Reply

Your email address will not be published.